ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದವರಿಗೆ ಸನ್ಮಾನ | ಪ್ರೋತ್ಸಾಹ ಕಾರ್ಯದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಳ : ರಾಜಶೇಖರ ಗೋನಾಯಕ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಸನ್ಮಾನ ಮತ್ತು ಪ್ರೋತ್ಸಾಹದಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ ಹೇಳಿದರು.
ನಗರದ ಜವಾಹರ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಹೂಮನ್ ರೈಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ಚಿತ್ತಾಪುರದ ಅಂಬಾಭವಾನಿ ಅಭಿವೃದ್ಧಿ ಸೇವಾ ಸಂಘದ ಸಹಯೋಗದಡಿ ವಿಶ್ವ ಪರಿಸರ ದಿನ ನಿಮಿತ್ತ 5ನೇ ಮತ್ತು 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದಕ್ಷಿಣ ವಲಯದಲ್ಲಿ ಅತ್ಯಧಿಕ ಅಂಕ ಪಡೆದ ಸರ್ಕಾರಿ ಪ್ರೌಢಶಾಲೆಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬೇಕು ಎಂದು ಕಿವಿಮಾತು ಹೇಳಿದರು.
ವಲಯ ಅರಣ್ಯಾಧಿಕಾರಿ ಗುರುರಾಜ ಉದ್ಘಾಟಿಸಿ ಮಾತನಾಡಿ, ಉತ್ತಮ ಪರಿಸರಕ್ಕಾಗಿ ಪ್ರತಿ ಮನೆಯಲ್ಲಿ ಗಿಡಮರ ಬೆಳೆಸಬೇಕು. ಪರಿಸರಕ್ಕೆ ಮಾರಕ ಎನಿಸಿರುವ ಪ್ಲಾಸ್ಟಿಕ್ ಬಳಸುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.
ಹೂಮನ್ ರೈಟ್ಸ್ ಕೌನ್ಸಿಲ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ನರಸಿಂಹ ಕುಲಕರ್ಣಿ ಮಾತನಾಡಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿವರ್ಷ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜವಾಹರ ಶಿಕ್ಷಣ ಸಂಸ್ಥೆ ಪ್ರಾಚಾರ್ಯ ವಸಂತರಾವ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಹಾಗರಗುಂಡಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ಮಲ್ಲಿಕಾರ್ಜುನ ಸೇಡಂ ಮಾತನಾಡಿದರು. ಅಂಬಾಭವಾನಿ ಸೇವಾ ಸಂಘದ ಅಧ್ಯಕ್ಷ ಅಂಬರೇಶ ರಂಗನೋರ, ಪ್ರೌಢಶಾಲೆ ಮುಖ್ಯಗುರು ಆನಂದ ರಾಠೋಡ್, ಮೋಹನ ರಾಠೋಡ್, ಶಂಕರ ಕಟಕೆ, ಶಿವಾನಂದ, ರಾಜೇಶ್ವರಿ ಚವ್ಹಾಣ, ಶರಣಮ್ಮ, ಶೀಲಾ ಇತರರಿದ್ದರು. ಉಮಾನಂದ ಸಾತ್ಯಾಳ ನಿರೂಪಣೆ ಮಾಡಿದರು. ಭಾಗ್ಯಶ್ರೀ ಸ್ವಾಗತಿಸಿದರು. ಕುಪೇಂದ್ರ ಸಾಲಿ ವಂದಿಸಿದರು.

