ತಹಸೀಲ್ದಾರ್ ಅವರಿಗೆ ಮನವಿ | ಚಿತ್ತಾಪುರ ತಾಲೂಕನ್ನು ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕು ಬರಗಾಲವೆಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ತಾಲೂಕು ಅಧ್ಯಕ್ಷ ಮೌನೇಶ್ ಭಂಕಲಗಿ ನೇತೃತ್ವದಲ್ಲಿ ರೈತರು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಈ ವರ್ಷ ಮಳೆ ಕೈಕೊಟ್ಟ ಕಾರಣ ರೈತರು ಬಹಳ ಸಂಕಷ್ಟದಲ್ಲಿ ಇದ್ದಾರೆ. ಮೇಲಾಗಿ ಮಳೆ ಇಲ್ಲದೆ ರೈತರು ಆತ್ಮಹತ್ಯೆ ಸಹ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ಸರ್ಕಾರ 101 ತಾಲೂಕುಗಳನ್ನು ಬರಗಾಲ ಎಂದು ಘೋಷಣೆ ಮಾಡಿದೆ. ಆದರೆ ನಮ್ಮ ತಾಲೂಕನ್ನು ಬರಗಾಲ ಘೋಷಣೆಯಿಂದ ಕೈಬಿಟ್ಟಿರುವುದು ಈ ಭಾಗದ ರೈತರಿಗೆ ಅನ್ಯಾಯ ಮಾಡಿದೆ ಎಂದು ಹೇಳಿದರು.
ಚಿತ್ತಾಪುರ ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡಿ ಕೂಡಲೇ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ ಒದಗಿಸಬೇಕು, ರಾಷ್ಟ್ರೀಕೃತ ಬ್ಯಾಂಕಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು, ಹಿಂಗಾರ ಬಿತ್ತನೆ ಬೀಜಗಳನ್ನು ರೈತರಿಗೆ ಉಚಿತವಾಗಿ ವಿತರಣೆ ಮಾಡಬೇಕು, ತಾಲೂಕಿನ ಕೆಲ ರೈತರಿಗೆ ಇನ್ಸೂರೆನ್ಸ್ ಹಣ ಬಂದಿದ್ದು ಇನ್ನು ಕೆಲವರಿಗೆ ಬಂದಿರುವುದಿಲ್ಲ. ಕೂಡಲೇ ಉಳಿದ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಗೌರವಾಧ್ಯಕ್ಷ ಶಾಂತಕುಮಾರ್ ಮಳಖೇಡ, ನಗರಾಧ್ಯಕ್ಷ ವಿಠಲ್ ಕಟ್ಟಿಮನಿ, ಶಿವರಾಮ ಚವ್ಹಾಣ, ತುಕಾರಾಮ ನಾಯಕ, ಪ್ರಕಾಶ ಸಲಗರ, ಮೋಹನ ಬೆಂಜಿ, ನರಹರಿ ಕುಲಕರ್ಣಿ, ಶ್ರೀಕಾಂತ ಹೊಸಳ್ಳಿಕರ್, ಮಂಜುನಾಥ ಕಾಶಿ, ಮಹ್ಮದ್ ಅಲಿ, ಯೂಸುಫ್ ಖಾನ್ ಸೇರಿದಂತೆ ಇತರರು ಇದ್ದರು.

