ಚಿತ್ತಾಪುರದಲ್ಲಿ ವಿಶ್ವ ಪೌಷ್ಟಿಕಾಂಶ ದಿನ, ಕಾನೂನು ಅರಿವು ಕಾರ್ಯಕ್ರಮ | ಪೌಷ್ಟಿಕಾಂಶದ ಮಹತ್ವವನ್ನು ಸಾರ್ವಜನಿಕರಲ್ಲಿ ತಿಳಿಸುವುದು ಕಾನೂನು ಅರಿವು ಕಾರ್ಯಕ್ರಮದ ಉದ್ದೇಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪೌಷ್ಟಿಕಾಂಶದ ಮಹತ್ವವನ್ನು ಸಾರ್ವಜನಿಕರಲ್ಲಿ ತಿಳಿಸುವುದು, ಆರೋಗ್ಯಕರ ಆಹಾರ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸುವುದು ಕಾನೂನು ಅರಿವು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಕಿಶನ್ ಬಿ. ಮಾಡಲಗಿ ಅವರು ಹೇಳಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವಿಶ್ವ ಪೌಷ್ಟಿಕಾಂಶ ದಿನ’ದ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೃಕೃತಿದತ್ತವಾಗಿ ಬೆಳೆದ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕಾಂಶ ಇರುತ್ತದೆ. ಪೌಷ್ಟಿಕ ಆಹಾರದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ನೀಡಲು ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ತಾಯಿ ಗರ್ಭದಲ್ಲಿ ಇರುವಾಗಿನಿಂದಲೂ ಮಗು ಹುಟ್ಟುವವರೆವಿಗೂ ನೀಡಲು ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಮ ಪಾಷಾ ಅವರು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪೌಷ್ಟಿಕ ಆಹಾರದ ಪಾತ್ರದ ಬಗ್ಗೆ ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದ್ದ ನ್ಯಾಯವಾದಿ ಮಲ್ಲಿಕಾರ್ಜುನ ಹೊನಗುಂಟಿ ಅವರು, ‘ವಿಶ್ವ ಪೌಷ್ಟಿಕಾಂಶ ದಿನ’ದ ಮಹತ್ವ, ಪೌಷ್ಟಿಕತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಕಾನೂನುಗಳು, ಸರ್ಕಾರಿ ಯೋಜನೆಗಳು ಹಾಗೂ ಅವುಗಳ ಲಾಭ ಪಡೆಯುವ ವಿಧಾನಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಸರ್ಕಾರಿ ವಕೀಲರಾದ ವಿ.ಆರ್. ಕಾಂತಾ, ಸಹಾಯಕ ಸರ್ಕಾರಿ ಅಭಿಯೋಜಕರು ಅಂಜನಾದೇವಿ. ಆರ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸೋಮಶೇಖರ ಬಿ. ಕರದಳ್ಳಿ, ತಾಲೂಕಾ ಆರೋಗ್ಯ ಅಧಿಕಾರಿ ವೀರನಾಥ ಕೆ. ಪಿಎಸ್ಐ ಬಾಬುರಾವ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಗೂ ಇನ್ನಿತರರು ಹಾಜರಿದ್ದರು.

