ಪಿಎಂ ಮಿತ್ರ ಜವಳಿ ಪಾರ್ಕ್ ಕಾಮಗಾರಿ ಚುರುಕುಗೊಳಿಸಲು ಸಚಿವರ ಸಭೆಯಲ್ಲಿ ತೀರ್ಮಾನ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಮುಖ್ಯಮಂತ್ರಿಗಳು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ (PM MITRA Park) ಯೋಜನೆಯ ಕಾಮಗಾರಿಗಳನ್ನು ಅತ್ಯಂತ ವೇಗವಾಗಿ ಮುಗಿಸಲು ನಿರ್ಧರಿಸಲಾಯಿತು.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆಯವ್ಯಯದ ಘೋಷಣೆಯನ್ನು ಕಾಲಮಿತಿಯಲ್ಲಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಕೈಗಾರಿಕ ಹಾಗೂ ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಜವಳಿ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಘೋಯಲ್ ಚೌಧರಿ, ಜವಳಿ ಇಲಾಖೆಯ ಆಯುಕ್ತ ಕೆ.ಬಿ.ಬಸವರಾಜ್, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಹಾಗೂ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪರಿಷ್ಕೃತ ಯೋಜನಾ ವರದಿ (DPR) ಸಿದ್ಧತೆ: ಕಲಬುರಗಿ ಪಾರ್ಕ್ನ ಬಾಹ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಒಳಗೊಂಡಂತೆ ಸಮಗ್ರ ಯೋಜನಾ ವರದಿಯನ್ನು (DPR) ತಕ್ಷಣವೇ ಪರಿಷ್ಕರಿಸಿ, ಭಾರತ ಸರ್ಕಾರದ ಯೋಜನಾ ಅನುಮೋದನೆ ಸಮಿತಿ (PAC) ಗೆ ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಭೂಮಿ ಹಂಚಿಕೆ ಮತ್ತು ಆಂತರಿಕ ಕಾಮಗಾರಿ: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಮೂಲಕ ಪಾರ್ಕ್ನ ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಮೊದಲ ಹಂತದ ಯಶಸ್ವಿ ಅನುಷ್ಠಾನದ ನಂತರವಷ್ಟೇ, ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಪ್ರಮಾಣವನ್ನು ಆಧರಿಸಿ ಎರಡನೇ ಹಂತದ ಅಭಿವೃದ್ಧಿಗೆ ಚಾಲನೆ ನೀಡಲು ಸಭೆ ನಿರ್ಧರಿಸಿತು ಎಂದೂ ಸಚಿವರು ವಿವರಗಳನ್ನು ನೀಡಿದ್ದಾರೆ.
ಕೇಂದ್ರ ಸರ್ಕಾರದ ‘ಅಭಿವೃದ್ಧಿ ಬಂಡವಾಳ ಬೆಂಬಲ’ (DCS) ಯೋಜನೆಯಡಿ ಒಟ್ಟು ಯೋಜನಾ ವೆಚ್ಚದ ಶೇ. 30 ರಷ್ಟು (ಗರಿಷ್ಠ ₹500 ಕೋಟಿ) ಧನಸಹಾಯ ಲಭ್ಯವಾಗಲಿದ್ದು, ಇದನ್ನು ಎರಡು ಹಂತಗಳಲ್ಲಿ ಬಳಸಿಕೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಪಾರ್ಕ್ನ ಗೇಟ್ನಿಂದ ಹೊರಗಡೆ ನಡೆಯುವ ಬಾಹ್ಯ ಕಾಮಗಾರಿಗಳನ್ನು ಒಟ್ಟಾರೆ ಅನುದಾನದ ಅರ್ಹತೆಗಾಗಿ ಪರಿಗಣಿಸಬಹುದಾದರೂ, ಕೇಂದ್ರದ ನಿಜವಾದ ಧನಸಹಾಯವನ್ನು ಕೇವಲ ಪಾರ್ಕ್ನ ಒಳಗಿನ ಆಂತರಿಕ ಮೂಲಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ (CETP) ಮತ್ತು ವಸತಿ ನಿಲಯಗಳಿಗಾಗಿ ಬಳಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಕಲಬುರಗಿ ಜಿಲ್ಲೆಯ ಆರ್ಥಿಕ ಚಿತ್ರಣವನ್ನೇ ಬದಲಿಸಬಲ್ಲ ಮತ್ತು ಸಾವಿರಾರು ಜನರಿಗೆ ಉದ್ಯೋಗ ನೀಡಬಲ್ಲ ಈ ಬೃಹತ್ ಜವಳಿ ಪಾರ್ಕ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆಗೆ ಅನುವಾಗುವಂತೆ, ರಾಜ್ಯ ಅನುಷ್ಠಾನ ಸಂಸ್ಥೆಯು ಕನಿಷ್ಠ ₹25 ಕೋಟಿ ಹಣವನ್ನು ಭೌತಿಕ ಮೂಲಸೌಕರ್ಯಗಳಿಗಾಗಿ ವಿನಿಯೋಗಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
