ಆದರ್ಶ ಪಿಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ| ಪಾಠ ಕಲಿಸಿದ ಶಿಕ್ಷಕರ ಸೇವೆ ಅವಿಸ್ಮರಣೀಯ: ಅವಂಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಎಷ್ಟೇ ಎತ್ತರದ ಉನ್ನತ ಸ್ಥಾನಮಾನಕ್ಕೆ ಹೋದರೂ ಅದಕ್ಕೆ ಮೂಲ ಶಿಕ್ಷಕರ ಪ್ರೇರಣೆ ಮತ್ತು ಪ್ರೋತ್ಸಾಹವೇ ಕಾರಣ ಹೀಗಾಗಿ ಪಾಠ ಕಲಿಸಿದ ಶಿಕ್ಷಕರ ಸೇವೆ ಯಾವತ್ತೂ ಮರೆಯುವುದಕ್ಕೆ ಆಗುವುದಿಲ್ಲ ಅದು ಅವಿಸ್ಮರಣೀಯ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಬಸವರಾಜ ಅವಂಟಿ ಹೇಳಿದರು.
ಪಟ್ಟಣದ ನಾಗಾವಿ ಕ್ಯಾಂಪಸ್ ನ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ಹಾಗೂ ಕಾಲೇಜಿನ ಸಾಧನೆ ಆಗಿರುತ್ತದೆ ಹಾಗಾಗಿ ತಾವೆಲ್ಲ ಆಸಕ್ತಿಯಿಂದ ಓದಿನ ಕಡೆಗೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪರಮೇಶ್ವರ ಪಂಚನಕರ್ ಮಾತನಾಡಿ, ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ, ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಅವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ಉಪ ಪ್ರಾಚಾರ್ಯ ಸಂತೋಷ ಜಮಾದಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಹಾಗೂ ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಅಡಿಪಾಯ. ಹೀಗಾಗಿ ಗುರುಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಫಾತಿಮಾ ಬೇಗಂ, ಸುನಿಲ್ ಜೇರಟಗಿ, ಸಂಗಮೇಶ್ ರೋಣದ್, ಅರ್ಚನಾ ಮಠ ಉಪಸ್ಥಿತರಿದ್ದರು.

