ಚಿತ್ತಾಪುರ ಬಾಗಿ ನಿಂತ ವಿದ್ಯುತ್ ಕಂಬಗಳು | ಅಪಾಯಕ್ಕೆ ಆಹ್ವಾನ, ಕೂಡಲೇ ದುರಸ್ತಿ ಮಾಡಲು ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಕೋರ್ಟ್ ಪಕ್ಕದ ಯುಜಿಡಿ ರಸ್ತೆಯಲ್ಲಿ ಬೃಹತ್ ಗಾತ್ರದ ವಿದ್ಯುತ್ ಕಂಬಗಳು ನೆಲಕ್ಕುರುಳುವ ಸ್ಥಿತಿಯಲ್ಲಿ ಬಾಗಿ ನಿಂತಿವೆ ಇದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ ಇಷ್ಟಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೇ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.
ಗಣೇಶ ನಗರದ ವಿದ್ಯುತ್ ಘಟಕದಿಂದ ಡಿಗ್ರಿ ಕಾಲೇಜಿನ ಹಿಂದೆ ಭಾಗೋಡಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕೈಗಾರಿಕೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೃಹತ್ ಗಾತ್ರದ ವಿದ್ಯುತ್ ಕಂಬಗಳು ಹಾಕಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯುತ್ ಕಂಬಗಳು ಹಾಕಿ ಇನ್ನೂ 15-20 ದಿನಗಳು ಆಗಿಲ್ಲ, ಆಗಲೆ ಬಾಗಿ ನಿಂತಿವೆ ಇದರಿಂದ ಈ ಮಾರ್ಗದಿಂದ ಹೋಗುವ ರೈತರು ಹಾಗೂ ವಿವಿಧ ಬಡಾವಣೆಗಳ ನಿವಾಸಿಗಳು ಆತಂಕದಲ್ಲಿಯೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಕಂಬಗಳು ಬಾಗಿ ನಿಂತು ಮೂರು ದಿನಗಳು ಕಳೆದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ದುರಸ್ತಿ ಮಾಡುವ ಕೆಲಸಕ್ಕೆ ಮುಂದಾಗಿಲ್ಲ ಎಂದು ರೈತ ಪಂಕಜ್ ಗೌಡ್ ತಿಳಿಸಿದ್ದಾರೆ.
ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಬಾಗಿ ನಿಂತ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ.
