ಕಾಂಗ್ರೆಸ್ ಹಿರಿಯ ನಾಯಕ ಡಾ. ಭೀಮಣ್ಣ ಖಂಡ್ರೆ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶೋಕ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶೈಕ್ಷಣಿಕ ತಜ್ಞ, ಹೋರಾಟಗಾರ ಹಾಗೂ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ‌ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಶೋಕ ವ್ಯಕ್ತಪಡಿಸಿದ್ದಾರೆ.

ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಒಡನಾಟವನ್ನು ನೆನಪಿಸಿಕೊಂಡ ಖರ್ಗೆ, ಡಾ.ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ಮಾರ್ಗದರ್ಶಕರಾಗಿದ್ದರು‌. ಅವರ ನಿಧನದಿಂದಾಗಿ ಹಿರಿಯ ನಾಯಕರನ್ನು ಕಳೆದುಕೊಂಡಿದ್ದೇನೆ. ಇದು ವೈಯಕ್ತಿಕವಾಗಿ ನನಗೆ ಅಪಾರ ನೋವು ತಂದಿದೆ.

ಸಾರ್ವಜನಿಕ ಜೀವನ, ರಾಜಕೀಯ, ಸಹಕಾರ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು ಸಚಿವರಾಗಿ, ಕಾರಾಂಜಾ ನದಿಯಿಂದ ನೀರಾವರಿ ಯೋಜನೆ ಜಾರಿಗೊಳಿಸಿ ಕೃಷಿ ಕ್ಷೇತ್ರದಲ್ಲೂ ಬೆಳವಣಿಗೆಗೆ ಕಾರಣೀಕರ್ತರಾಗಿದ್ದರು.

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಡಾ. ಭೀಮಣ್ಣ ಖಂಡ್ರೆ ಸಮಾಜದ ಅಭ್ಯುದಯಕ್ಕೆ ಕೂಡಾ ಶ್ರಮಿಸಿದ್ದರು ಎಂದು ಗುಣಗಾನ ಮಾಡಿದ್ದಾರೆ.

ಡಾ.ಖಂಡ್ರೆ ಅವರ ನಿಧನದಿಂದಾಗಿ ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ನೋವು ಉಂಟಾಗಿವೆ. ಅವರ ನಿಧನದ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಂಸದ ರಾಧಾಕೃಷ್ಣ ದೊಡ್ಡಮನಿ ಶೋಕ

ಹಿರಿಯ ನಾಯಕ, ರಾಜಕೀಯ ಮುತ್ಸದ್ದಿ ಹಾಗೂ ಲೋಕನಾಯಕ ಡಾ.ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಶೋಕ ವ್ಯಕ್ತಪಡಿಸಿದ್ದಾರೆ.

ಶ್ರೀಯುತರ ನಿಧನದಿಂದಾಗಿ ಪಕ್ಷ ಒಬ್ಬ ಧೀಮಂತ ಹಾಗೂ ಜನಪರ ಕಾಳಜಿಯುಳ್ಳ ನಾಯಕನನ್ನು ಕಳೆದುಕೊಂಡಿದೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!