ಚಿತ್ತಾಪುರ ಅಂಬೇಡ್ಕರ್ ಹಾಸ್ಟೆಲ್ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಮಳಖೇಡ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಹಾಸ್ಟೆಲ್ ಎದುರು ಭಾನುವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ನಲ್ಲಿ ನಾಲ್ಕು ತಿಂಗಳಿಂದ ವಾರ್ಡನ್ ಹುದ್ದೆ ಖಾಲಿ ಉಳಿದಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಊಟ ದೊರಕುತ್ತಿಲ್ಲ, ಹೀಗಾಗಿ ಎಲ್ಲ ವಿದ್ಯಾರ್ಥಿಗಳು ಊಟಕ್ಕಾಗಿ ಪರದಾಡುವಂತಾಗಿದೆ ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದೆ ಬಂದಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಹಾಸ್ಟೆಲ್ ನಲ್ಲಿ ಕಿಟ್ ನೀಡುತ್ತಿಲ್ಲ, ದಿನ ನಿತ್ಯದ ಬ್ರೆಷ, ಟೂತ್ ಪೇಸ್ಟ್, ಕೊಬ್ರಣ್ಣಿ, ಕುಡಿಯುವ ನೀರು, ಸಮಯಕ್ಕೆ ಸರಿಯಾಗಿ ಊಟ ಹಾಗೂ ದಿನಪತ್ರಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಹಾಸ್ಟೆಲ್ ವಾರ್ಡನ್ ಕೊರತೆಯಿಂದ ಸಮಸ್ಯೆಗಳು ಉದ್ಭವಿಸಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಎಲ್ಲ ಸಮಸ್ಯೆಗಳ ಕುರಿತು ಸಾಕಷ್ಟು ಬಾರಿ ಸಮಾಜ ಕಲ್ಯಾಣಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನ ಆಗಿಲ್ಲ ಎಂದು ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

