ಚಿತ್ತಾಪುರದ ಶ್ರೀ ವಿಶ್ವಗುರು ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ 16 ನೇ ವಾರ್ಷಿಕೋತ್ಸವ ಸಮಾರಂಭ ಫೆ.23 ಕ್ಕೆ | ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಗಮನ: ನಾಗರೆಡ್ಡಿ ಪಾಟೀಲ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಶ್ರೀ ವಿಶ್ವಗುರು ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ (ರಿ.) ಸಂಚಾಲಿತ ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ ಸ್ಮಾರಕ ಸಿ.ಬಿ.ಎಸ್.ಇ. ಶಾಲೆ, ಪಿಯು ಮತ್ತು ಪದವಿ (ವಿಜ್ಞಾನ ಮತ್ತು ವಾಣಿಜ್ಯ) ಕಾಲೇಜು, ಹಾಗೂ ಎಂ.ಬಿ. ಪಾಟೀಲ ಪಬ್ಲಿಕ್ ಶಾಲೆ ಮತ್ತು ಪಿಯು (ಕಲಾ) ಕಾಲೇಜುಗಳ 16 ನೇ ವಾರ್ಷಿಕೋತ್ಸವ ಹಾಗೂ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭ ಕ್ರೀಡಾಂಗಣ ಎದುರುಗಡೆಯ ಎಂ.ಬಿ.ಪಾಟೀಲ ಪಬ್ಲಿಕ್ ಶಾಲಾ ಆವರಣದಲ್ಲಿ ಇದೇ ಫೆ.23 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಂಡಿದ್ದು, ವಿಶೇಷವಾಗಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸುತ್ತಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಪಟ್ಟಣದ ಅವರ ಆಡಳಿತ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶತಮಾನದ ಶರಣ, ಸಂತನೆಂದೇ ಖ್ಯಾತಿ ಪಡೆದ ಗವಿಮಠದ ಶ್ರೀಗಳು ಚಿತ್ತಾಪುರ ಪಟ್ಟಣಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿದ್ದಾರೆ ಇದು ನಮ್ಮೆಲ್ಲರ ಸೌಭಾಗ್ಯ. ಹೀಗಾಗಿ ನಮ್ಮ ಶಿಕ್ಷಣ ಸಂಸ್ಥೆಯ ವತಿಯಿಂದ ಈಗಾಗಲೇ ಎಲ್ಲಾ ಪೂರ್ವ ಸಿದ್ಧತೆ ಕಾರ್ಯ ಕೈಗೊಳ್ಳಲಾಗಿದೆ. ಆದರೂ ಪಟ್ಟಣದ ಜನರೂ ಸಹ ಕೈಜೋಡಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುಸಜ್ಜಿತ ವೇದಿಕೆ, ಸಾರ್ವಜನಿಕರಿಗೆ ಕೂಡಲು ಮೂರು ಸಾವಿರ ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಸಹ ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ಹೇಳಿದರು.
ಅಂದಿನ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ, ಅಬ್ಬೆ ತುಮಕೂರು ಶ್ರೀ ವಿಶ್ವಾರಾಧ್ಯ ಸಿದ್ಧ ಸಂಸ್ಥಾನ ಮಠದ ಶ್ರೀ ಡಾ. ಗಂಗಾಧರ ಮಹಾಸ್ವಾಮಿಗಳು, ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ದಿಗ್ಗಾಂವ ಪಂಚಗೃಹ ಹಿರೇಮಠದ ಶ್ರೀ ಸಿದ್ದವೀರ ಶಿವಾಚಾರ್ಯರು, ರಾವೂರ ಸಿದ್ದಲಿಂಗೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಕಲಬುರಗಿ ಡಿಡಿಪಿಐ ಶಂಕ್ರಮ್ಮ ಡವಳಗಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಆದ್ದರಿಂದ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗವಿಮಠದ ಶ್ರೀಗಳ ದರ್ಶನಾಶೀರ್ವಾದ ಪಡೆದು ಪ್ರವಚನ ಆಲಿಸಿ ಪುನೀತರಾಗಬೇಕು ಎಂದು ನಾಗರೆಡ್ಡಿ ಪಾಟೀಲ ಕೋರಿದ್ದಾರೆ. ಈ ಸಂದರ್ಭದಲ್ಲಿ ವಿಶ್ವಾರಾಧ್ಯ ಎನ್.ಪಾಟೀಲ ಇದ್ದರು.

