ಚಿತ್ತಾಪುರ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ | ಸಂವಿಧಾನದ ಮೌಲ್ಯಗಳನ್ನು ಗೌರವಿಸಿ ಉತ್ತಮ ಪ್ರಜೆಗಳಾಗೋಣ: ಹಿರೇಮಠ ಅಭಿಮತ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ನಮ್ಮ ದೇಶವು ಬ್ರೀಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯವನ್ನು ತರಲು ಲಕ್ಷಾಂತರ ದೇಶಪ್ರೇಮಿಗಳ ಹೋರಾಟ ಅವರ ಧೈರ್ಯ ಮತ್ತು ಬಲಿದಾನದದಿಂದಾಗಿ ಇಂದು ಸ್ವತಂತ್ರ ವಾತಾವರಣದಲ್ಲಿ ದೇಶದ 80 ನೇ ಸ್ವಾತಂತ್ರ್ಯ ಹಬ್ಬವನ್ನು ಅತ್ಯಂತ ಸಂಬ್ರಮದಿಂದ ಆಚರಿಸುತ್ತಿದ್ದೇವೆ, ನಮಗೆ ಸಿಕ್ಕಿರುವ ಸ್ವಾತಂತ್ರ್ಯದಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌರವಿಸಿ ಉತ್ತಮ ಪ್ರಜೆಗಳಾಗೋಣ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಪ್ರಜಾ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಸಿಕ್ಕಾಗ ಆಹಾರಕ್ಕೂ ಪರದೇಶಗಳನ್ನು ಅವಲಂಬಿಸಿಕೊಂಡಿದ್ದ ನಮ್ಮ ದೇಶವು ಇಂದು ಸ್ವಾವಲಂಬಿಯಾಗಿದೆ. ವಿಜ್ಞಾನ ತಂತ್ರಜ್ಞಾನ ಮತ್ತು ರಕ್ಷಣೆ, ಆರ್ಥಿಕವಾಗಿ ಭಾರತವು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನದಲ್ಲಿದೆ ಹೀಗಾಗಿ ದೇಶದ ಏಕತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಾತನಾಡಿ, ಕ್ಷೇತ್ರದ ಶಾಸಕರಾಗಿರುವ ಸಚಿವ ಪ್ರಿಯಾಂಕ್ ಖರ್ಗೆರವರು ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ ಮತ್ತು ಇಂದಿನ ತಂತ್ರಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ತಾಲೂಕಿನ 21 ಶಾಲೆಗಳಲ್ಲಿ ಎಐ ತಂತ್ರಜ್ಞಾನವನ್ನು ಫ್ರೌಢಶಾಲೆಯ ಹಂತದಲ್ಲಿ ಮಕ್ಕಳಿಗೆ ನೀಡುವುದರ ಮೂಲಕ ಸೌಲಭ್ಯವನ್ನು ಒದಗಿಸುತ್ತಿದ್ದಾರೆ ಇದರಿಂದ ಮಕ್ಕಳ ಮುಂದಿನ ಭವಿಷ್ಯದಲ್ಲಿ ತುಂಬಾ ಸಹಕಾರಿಯಾಗಲಿದೆ ಎಂದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಡಿಗ್ರಿ ಕಾಲೇಜಿನ ಪ್ರಾಚಾರ್ಯ ಪದ್ಮಣ್ಣ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಟಿಎಪಿಸಿಎಂಎಸ್ ಅಧ್ಯಕ್ಷ ದೇವಿಂದ್ರ ಅರಣಕಲ್, ತಾಪಂ ಇಓ ಮಹ್ಮದ್ ಅಕ್ರಂ ಪಾಷಾ, ಸಿಪಿಐ ಸಿ.ಎಸ್.ಪಾಟೀಲ, ಮುಖ್ಯಾಧಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ, ಸಿಡಿಪಿಒ ಆರತಿ ತುಪ್ಪದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಪಶುಸಂಗೋಪನೆ ಇಲಾಖೆ ಎಡಿಎ ಡಾ.ಶಂಕರ ಕಣ್ಣಿ ನಿರೂಪಿಸಿದರು, ಶಿವಶರಣಪ್ಪ ಮಂಠಾಳೆ ವಂದಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

