ಮಾಜಿ ಸಿಎಂ ಎಸ್.ಎಂ.ಕೃಷ್ಣ ಗೌರವಾರ್ಥ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಚಿತ್ತಾಪುರದಲ್ಲಿ ಶಾಲೆಗಳು ಯಥಾಪ್ರಕಾರ ನಡೆಯುತ್ತಿರುವುದಕ್ಕೆ ವ್ಯಾಪಕ ಖಂಡನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ಡಿಸೆಂಬರ್ 10 ರಂದು ಮಂಗಳವಾರ ಬೆಳಗಿನ ಜಾವ 2.30 ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಅಧಿಸೂಚನೆ ಹೊರಡಿಸಿದೆ.
ದಿವಂಗತರ ಗೌರವಾರ್ಥವಾಗಿ ಡಿ.11 ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಆದರೆ ಚಿತ್ತಾಪುರದಲ್ಲಿ ಮಾತ್ರ ಕೆಲ ಶಿಕ್ಷಣ ಸಂಸ್ಥೆಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಯಥಾಪ್ರಕಾರ ಶಾಲೆಗಳು ನಡೆಸುತ್ತಿರುವುದು ಕಂಡುಬಂದಿದೆ.
ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸದೆ ಹಾಗೂ ಸರ್ಕಾರದ ಅಧಿಕೃತ ಆದೇಶ ಇದ್ದರೂ ಸಹ ಶಾಲಾ ಕಾಲೇಜುಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇಷ್ಟಾದರೂ ತಹಸೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೆ ಮೌನವಹಿಸುವುದಕ್ಕೆ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್ 10 ರಿಂದ 12 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸಿ.ಆ.ಸು.ಇ.(ರಾಜ್ಯ ಶಿಷ್ಟಾಚಾರ) ಸರ್ಕಾರದ ಉಪ ಕಾರ್ಯದರ್ಶಿ ಎಲಿಷ ಆಂಡ್ರಸ್ ಆದೇಶ ಹೊರಡಿಸಿದ್ದಾರೆ.