ಡಂಡೋತಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಮಣಿಕಂಠ ರಾಠೋಡ ಕಿಡಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ವಿಷಬಾಧೆ ಶಂಕೆಯಿಂದ ಸುಮಾರು 50–60 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದು ಅತ್ಯಂತ ದುರಂತಕರ ಮತ್ತು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಕಿಡಿ ಕಾರಿದ್ದಾರೆ.
ಚಿತಾಪುರ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಆದ್ಯತೆ ಏನು? ಕ್ಷೇತ್ರದ ಮಕ್ಕಳ ಜೀವವೇ, ಅಥವಾ ರಾಜಕೀಯವೇ? ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ನರಳುತ್ತಿರುವಾಗ ಜನರ ನೋವಿನ ನಡುವೆ ನಿಲ್ಲಬೇಕಾದ ನಿಮ್ಮ ನಾಯಕತ್ವ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಇಂತಹ ಘಟನೆಗಳು ನಡೆದಾಗ ಜನರೊಂದಿಗೆ ನಿಲ್ಲುವುದು ಜನಪ್ರತಿನಿಧಿಯ ಕರ್ತವ್ಯ. ಆದರೆ ನಿಮ್ಮ ನಡೆ ನೋಡಿದರೆ ಚಿತಾಪುರದ ಜನರ ಸಮಸ್ಯೆಗಳಿಗಿಂತ ರಾಜಕೀಯ ವಿಚಾರಗಳೇ ಹೆಚ್ಚು ಮುಖ್ಯ ಎನ್ನುವ ಭಾವನೆ ಮೂಡುತ್ತಿದೆ ಎಂದು ಟೀಕಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಚಿಕಿತ್ಸೆ ನೀಡಬೇಕು ಹಾಗೂ ಇಂತಹ ಘಟನೆಗಳು ಮತ್ತೇ ನಡೆಯದಂತೆ ಶಾಶ್ವತ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಚಿತಾಪುರದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮಕ್ಕಳ ಜೀವದ ಪ್ರಶ್ನೆಯಲ್ಲಿ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು. ಜನರ ವಿಶ್ವಾಸ ಕಾಪಾಡಬೇಕಾದರೆ ಮಾತಲ್ಲ, ಕೆಲಸ ಮಾಡಿ ತೋರಿಸಿ ಎಂದು ಒತ್ತಾಯಿಸಿದ್ದಾರೆ.

