ದಿನಪತ್ರಿಕೆ ಓದು ಕಡ್ಡಾಯ ಸರ್ಕಾರದ ನಿರ್ಧಾರಕ್ಕೆ: ಹಣಮಂತ ಶೇರಿ ಸ್ವಾಗತ
ನಾಗಾವಿ ಎಕ್ಸಪ್ರೆಸ್
ಆಳಂದ: ರಾಜ್ಯದ ಶಾಲಾ ಮಕ್ಕಳಲ್ಲಿ ಸಾಮಾನ್ಯಜ್ಞಾನ ಹೆಚ್ಚಿಸಲು ಮತ್ತು ಕನ್ನಡ ಭಾಷಾ ಕೌಶಲವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ 10 ರಿಂದ 15 ನಿಮಿಷಗಳ ಕಾಲ ಕಡ್ಡಾಯವಾಗಿ ಕನ್ನಡ ದಿನಪತ್ರಿಕೆ ಓದಿಸುವ ಅಭ್ಯಾಸವನ್ನು ಜಾರಿಗೆ ತರಲು ಆದೇಶಿಸಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಈ ಸುತ್ತೋಲೆಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ (ಖಾಸಗಿ) ಶಾಲೆಗಳಿಗೆ ಈ ನಿಯಮ ಅನ್ವಯವಾಗಲಿದೆ. ಪ್ರತಿದಿನ ಶಾಲಾ ಪ್ರಾರ್ಥನೆಯ ನಂತರದ ಮೊದಲ 10 ರಿಂದ 15 ನಿಮಿಷಗಳನ್ನು ಪತ್ರಿಕೆ ಓದಲು ಮೀಸಲಿಡಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಮತ್ತು ಗ್ಯಾಜೆಟ್ಗಳಿಗೆ ಹೆಚ್ಚು ಅಂಟಿಕೊಳ್ಳುತ್ತಿರುವುದರಿಂದ ಅವರಲ್ಲಿ ಏಕಾಗ್ರತೆ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಿ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ, ಭಾಷಾ ಶೈಲಿ, ಬರವಣಿಗೆ ಕೌಶಲ ಮತ್ತು ಪ್ರಚಲಿತ ವಿದ್ಯಮಾನಗಳ ಅರಿವು ಮೂಡಿಸುವಲ್ಲಿ ದಿನಪತ್ರಿಕೆ ಓದುವುದು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪತ್ರಿಕಾ ಓದು ಪೂರಕವಾಗಲಿದೆ ಎಂದು ಆಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಎಲ್ಲಾ ಉಪನಿರ್ದೇಶಕರಿಗೆ (DDPI) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (BEO) ಸೂಚನೆ ನೀಡಿದೆ. ಈ ಹೊಸ ಕ್ರಮದಿಂದಾಗಿ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ನಾಡು-ನುಡಿ ಹಾಗೂ ಜಗತ್ತಿನ ವಿದ್ಯಮಾನಗಳ ಬಗ್ಗೆ ಆಳವಾದ ಜ್ಞಾನ ಪಡೆಯಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ನಿಟ್ಟಿನಲ್ಲಿ ಸರ್ಕಾರವೇ ಪ್ರತಿ ಶಾಲೆಗಳಿಗೆ ಕನಿಷ್ಟ 50 ದಿನಪತ್ರಿಕೆಗಳನ್ನು ಪೂರೈಸಲಿ ಇದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಪತ್ರಿಕೆಗಳಿಗೂ ಸಹಾಯ ಮಾಡಿದಂತಾಗುತ್ತದೆ ಎಂದು ಒತ್ತಾಯಿಸಿದ್ದಾರೆ.

