ಗುರುಮಠಕಲ್ನಲ್ಲಿ ಪಥ ಸಂಚಲನಕ್ಕೆ ಗ್ರೀನ್ ಸಿಗ್ನಲ್ | ನಾಳೆ ಆರ್.ಎಸ್.ಎಸ್ ಪಥ ಸಂಚಲನ
ನಾಗಾವಿ ಎಕ್ಸಪ್ರೆಸ್
ಗುರುಮಠಕಲ್: ಪಟ್ಟಣದಲ್ಲಿ ಆರ್.ಎಸ್.ಎಸ್ ಪಥ ಸಂಚಲನಕ್ಕೆ ಜಿಲ್ಲಾಡಳಿತ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಹಲವು ಷರತ್ತು ವಿಧಿಸಿ ಅ.31 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನ ನಡೆಸಲು ಅನುಮತಿ ನೀಡಿದೆ.
ಆರ್.ಎಸ್.ಎಸ್ನ ಜಿಲ್ಲಾ ಪ್ರಚಾರ ಪ್ರಮುಖ ಬಸಪ್ಪ ಸಂಜನೋಳ ಅವರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿ ಗೃಹ ಇಲಾಖೆ ಆದೇಶ ಹಾಗೂ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ನಿಗದಿತ ಮಾರ್ಗದಷ್ಟೇ ಬಳಕೆ. ಜಾತಿ ಅಥವಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಘೋಷಣೆ ಕೂಗದಿರುವುದು ಮತ್ತು ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸದಿರುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆ ನಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಕಾರ್ಯಕ್ರಮದ ವೇಳೆ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಪಥ ಸಂಚಲನದ ಸಂಪೂರ್ಣ ಚಿತ್ರೀಕರಣಕ್ಕೂ ಸೂಚನೆ ನೀಡಲಾಗಿದೆ. ಈ ಹಿಂದೆ ಅ.25 ರಂದು ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಆರ್ಎಸ್ಎಸ್ ಪ್ರಮುಖರು ಮನವಿ ಸಲ್ಲಿಸಿದ್ದರು. ಆದರೆ, ಪಥ ಸಂಚಲನಕ್ಕೆ ಕನಿಷ್ಠ ಮೂರು ದಿನಗಳ ಮುಂಚೆ ಅನುಮತಿಗೆ ಅರ್ಜಿ ಸಲ್ಲಿಸಿರಲಿಲ್ಲ ಎಂಬ ಕಾರಣ ನೀಡಿ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

