ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವ್ಯಕ್ತಿತ್ವದ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ನಾಳೆ ಬಿಜೆಪಿ ಕಚೇರಿಗೆ ಮುತ್ತಿಗೆ: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕೇಂದ್ರದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸ್ವಾಯತ್ತ ಸಂಸ್ಥೆಯಾದ ಇ.ಡಿ.ಯನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವ್ಯಕ್ತಿತ್ವದ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಿ.18 ರಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಮೂಲಕ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಈ ಪ್ರತಿಭಟನೆಯು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಿಲ್ಲಾ ಬಿಜೆಪಿ ಕಚೇರಿಯವರೆಗೆ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ನ್ಯಾಶನಲ್ ಹೆರಾಲ್ಡ್ (ಯಂಗ್ ಇಂಡಿಯಾ) ಪ್ರಕರಣವು ಕೇವಲ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಪಿತೂರಿ ಹಾಗೂ ಕಾನೂನು ಬಾಹೀರ ಪ್ರಕರಣ ಎಂಬುದಾಗಿ ಸಾಬೀತಾದ ಹಿನ್ನೆಲೆಗೆ ಸಂಬಂಧಪಟ್ಟಂತೆ ನ್ಯಾಶನಲ್ ಹೆರಾಲ್ಡ್ (ಯಂಗ್ ಇಂಡಿಯಾ) ಪ್ರಕರಣದಲ್ಲಿ ಯಾವುದೇ ಎಫ್.ಐ.ಆರ್ ದಾಖಲಾಗಿಲ್ಲ, ಯಾವುದೇ ಅಕ್ರಮ ಹಣ ವರ್ಗಾವಣೆ ನಡೆದಿರುವ ಪ್ರಕರಣ ಕಂಡುಬಂದಿಲ್ಲ ಎಂದು ಕೋರ್ಟಿನಲ್ಲಿ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಹಾಲಿ ಹಾಗೂ ಮಾಜಿ ಸಂಸದರು ಸಚಿವರು, ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾ ಕಾಂಗ್ರೆಸ್ ಸಮಿತಿ, ಮಾಜಿ ಅಧ್ಯಕ್ಷರು, ಡಿಸಿಸಿ ಡೆಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮುಂಚೂಣಿ ಘಟಕ/ವಿಭಾಗ/ಸೆಲ್ಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾ ಪೌರರು ಹಾಗೂ ಸದಸ್ಯರುಗಳು ಮಹಿಳೆಯರು, ಯುವಕರು, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದ್ದಾರೆ.

