ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದ ಮಣಿಕಂಠ ರಾಠೋಡ ವಿರುದ್ಧ ಶಿಸ್ತು ಕ್ರಮಕ್ಕೆ ಮಲ್ಲಿಕಾರ್ಜುನ ಕಾಳಗಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಧಿಕಾರ ಸಿಕ್ಕರೆ ಮೀಸಲಾತಿ ಬೇಕು ಎನ್ನುವವರನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿಕೆ ನೀಡಿದ್ದ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ವಿರುದ್ಧ ಬಿಜೆಪಿ ಹೈಕಮಾಂಡ್ ಶಿಸ್ತು ಕ್ರಮ ಕೈಗೊಂಡು ಬಿಜೆಪಿ ಯಿಂದ ಉಚ್ಚಾಟನೆ ಮಾಡಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದರಿಂದ ಇಡೀ ದಲಿತ ಸಮುದಾಯಕ್ಕೆ ನೋವುಂಟು ಮಾಡಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ಪರವಾಗಿ ಬಿಜೆಪಿ ಮುಖಂಡರು, ಮುತ್ಸದ್ದಿಗಳು ದೊಡ್ಡ ದೊಡ್ಡದಾಗಿ ಮಾತನಾಡುತ್ತಾರೆ ಆದರೆ ಈಗ ನಿಮ್ಮ ಪಕ್ಷದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದರೂ ನೀವೇಕೆ ಪ್ರತಿಕ್ರಿಯೆ ನೀಡದೇ ಮೌನಿಗಳಾಗಿದ್ದಿರಿ ಎಂದು ಪ್ರಶ್ನಿಸಿದ್ದಾರೆ.
ಮಣಿಕಂಠ ರಾಠೋಡ ತಾನೊಬ್ಬ ದಲಿತ ಎನ್ನುವುದು ಮರೆತು ಅಸಂಬದ್ಧ ಹೇಳಿಕೆ ನೀಡಿರುವುದು ದುರಹಂಕಾರದ ಪರಮಾವಧಿ. ಇತನಿಗೆ ನಾಯಕನಾಗುವ ಯಾವುದೇ ಲಕ್ಷಣಗಳು ಇಲ್ಲ. ಹಿಂದೊಮ್ಮೆ ಮಾದಿಗ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಈಗ ಮೀಸಲಾತಿ ಕೇಳುವವರನ್ನು ಜೈಲಿಗೆ ಹಾಕುತ್ತೇನೆ ಎಂದು ಹೇಳಿಕೆ ನೀಡಿರುವುದು ನೋಡಿದರೆ, ಶಾಂತಿಯಿದ್ದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರ ಅಡಗಿದೆ ಎಂದು ಹೇಳಿದರು.
ಮೀಸಲಾತಿಯಿಂದ ದಿನ ದಲಿತ, ಬಡವರಿಗೆ, ಶೋಷಿತರಿಗೆ ತುಂಬಾ ಅನುಕೂಲವಾಗಿದೆ. ಎಲ್ಲರಿಗೂ ಶಿಕ್ಷಣ, ಉದ್ಯೋಗ ಸೇರಿದಂತೆ ಸ್ಥಾನ ಮಾನ ಮತ್ತು ಅವಕಾಶಗಳು ಸಿಗುತ್ತಿವೆ. ಅಲ್ಲದೇ 371 ಜೆ ಕಲಂದಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುಂಬಾ ಅನುಕೂಲವಾಗಿದೆ. ಇಂತಹ ಸಂದರ್ಭದಲ್ಲಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಮಣಿಕಂಠ ರಾಠೋಡ ಮನಸ್ಥಿತಿ ಹದಗೆಟ್ಟಿದೆ ಹೀಗಾಗಿ ಕೂಡಲೇ ಹುಚ್ಚಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಬಿಜೆಪಿ ಹೈಕಮಾಂಡ್ ಗೆ ಕಿವಿಮಾತು ಹೇಳಿದರು.

