ಮೊಗಲಾ ಗ್ರಾಮದ ಹದಗೆಟ್ಟ ರಸ್ತೆಯಿಂದ ಸಾರಿಗೆ ಬಸ್ ಸಂಚಾರ ಸ್ಥಗಿತ|ಪ್ರಯಾಣಿಕರು ಪರದಾಟ, ಕೂಡಲೇ ಬಸ್ ಸಂಚಾರ ಪ್ರಾರಂಭಿಸಲು ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಮೊಗಲಾ ಗ್ರಾಮದ ರಸ್ತೆ ಹದಗೆಟ್ಟಿದ್ದರಿಂದ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೂಡಲೇ ಬಸ್ ಸಂಚಾರ ಪ್ರಾರಂಭಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಚಿತ್ತಾಪುರ ಪಟ್ಟಣದಿಂದ ಕೇವಲ 5 ಕಿ.ಮೀ ಅಂತರದಲ್ಲಿರುವ ಮೊಗಲಾ ಗ್ರಾಮಕ್ಕೆ ಬಸ್ ಸಂಚಾರ ಸ್ಥಗಿತಗೊಂಡು ಒಂದು ತಿಂಗಳಾಗಿದೆ ಈ ಕುರಿತು ಘಟಕ ವ್ಯವಸ್ಥಾಪಕರಿಗೆ ವಿಚಾರಿಸಿದಾಗ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪೂರ್ಣ ಹದಗೆಟ್ಟು ಹೋಗಿದೆ ಹೀಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಿಸಿದ್ದಾರೆ ಎಂದು ಗ್ರಾಮದ ಮುಖಂಡ ಶರಣು ಸಾಹು ತೊನಸನಳ್ಳಿ ತಿಳಿಸಿದ್ದಾರೆ.
ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಶಾಲಾಕಾಲೇಜುಗಳು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ ನಿತ್ಯ ಗ್ರಾಮದಿಂದ ಚಿತ್ತಾಪುರ ಪಟ್ಟಣಕ್ಕೆ ವಿದ್ಯಾಭ್ಯಾಸ ಮಾಡಲು ಬರುವ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರಿದೆ ಇದರಿಂದ ಅವರ ವಿದ್ಯಾಭ್ಯಾಸಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಅಲ್ಲದೇ ನಿತ್ಯ ವ್ಯಾಪಾರ ವಹಿವಾಟುಗಾಗಿ ಹಾಗೂ ಮಹಿಳೆಯರಿಗೆ, ರೈತರಿಗೆ ಹಾಗೂ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ, ಬಸ್ ಇಲ್ಲದೆ ಇರುವುದರಿಂದ ನಿತ್ಯದ ಕೆಲಸ ಕಾರ್ಯಗಳಿಗೆ ತೊಡಕು ಉಂಟಾಗಿದೆ.
ಪಟ್ಟಣದಿಂದ ಮೊಗಲಾ ಗ್ರಾಮಕ್ಕೆ ಹೋಗುವ ರಸ್ತೆ ಪೂರ್ಣವಾಗಿ ಹದಗೆಟ್ಟಿದೆ ರಸ್ತೆ ಮಧ್ಯೆದಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಈಗ ಮಳೆಗಾಲ ಇರುವುದರಿಂದ ಕೆಸರು ಗದ್ದೆಯಾಗಿದೆ, ದ್ವಿಚಕ್ರ ವಾಹನ ಹೋಗಬೇಕಾದರೂ ಪರದಾಡುವಂತಾಗಿದೆ ಹೀಗಾಗಿ ಕೂಡಲೇ ಸಂಬಂಧಪಟ್ಟವರು ಇಲಾಖೆಯ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ರಸ್ತೆ ಸುಧಾರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.