ಮೊಗಲಾ ತಾಂಡಾದಲ್ಲಿ ಹದಗೆಟ್ಟ ರಸ್ತೆ, ಸಂಚಾರಕ್ಕೆ ತೊಂದರೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಮೊಗಲಾ ತಾಂಡಾದಲ್ಲಿ ಹದಗೆಟ್ಟ ರಸ್ತೆ ಮತ್ತು ಚರಂಡಿ ಸಮಸ್ಯೆಯಿಂದ ವಾಹನ ಸವಾರರು, ಮಕ್ಕಳು, ವೃದ್ದರು ಹಾಗೂ ಪಾದಚಾರಿಗಳಿಗೆ ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ಇಷ್ಟಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವುದು ತಾಂಡಾದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ತಾಂಡಾದ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದಿದ್ದು ಅವುಗಳಲ್ಲಿ ಮಳೆ ನೀರು ಸಂಗ್ರಹವಾದ ಪರಿಣಾಮ ಗುಂಡಿ ಕಾಣದೆ ಬೈಕ್ ಸವಾರರು ಆಯತಪ್ಪಿ ಬೀಳುತ್ತಿದ್ದಾರೆ ಎಂದು ಬಂಜಾರ ಸಮಾಜದ ಮುಖಂಡ ರವಿ ರಾಠೋಡ ತಿಳಿಸಿದ್ದಾರೆ.
ತಾಂಡಾದಲ್ಲಿನ ಆಂತರಿಕ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ನಿವಾಸಿಗಳು ಕೆಸರಿನಲ್ಲಿಯೇ ಓಡಾಡುವಂತಾಗಿದೆ. ರಸ್ತೆಯಲ್ಲಿ ತಗ್ಗುಗಳು, ಬದಿಯಲ್ಲಿ ಕಲ್ಲುಗಳು ಬಿದ್ದಿರುವುದು, ವೃದ್ಧರು, ಮಹಿಳೆಯರು, ಮಕ್ಕಳು ಜಾರಿ ಬೀಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ತಾತ್ಕಾಲಿಕವಾಗಿ ಮುರಮ್ ಹಾಕಿ ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಪಂಚಾಯಿತಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ತಾಂಡಾದೊಳಗೆ ಹೋಗುವ ರಸ್ತೆ ಕೆಸರುಮಯವಾಗಿದ್ದು, ರಸ್ತೆ ಬದಿ ಶೌಚ ಹಾಗೂ ಚರಂಡಿ ನೀರು ಹರಿದು ಗಲೀಜು ಉಂಟಾಗಿದೆ. ಇದರಿಂದ ಸಾರ್ವಜನಿಕರು ತುಂಬಾ ತೊಂದರೆ ಹಾಗೂ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ.
“ರಸ್ತೆ ದುರಸ್ತಿ ಮಾಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಓಡಾಡಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು”.-ರವಿ ರಾಠೋಡ ಬಂಜಾರ ಸಮಾಜದ ಮುಖಂಡರು.

