Oplus_0

ನಾಲವಾರದಲ್ಲಿ ವೈಭವದ ತನಾರತಿ ಉತ್ಸವ | ಆರಾಧ್ಯ ಗುರುವಿಗೆ ಹರಕೆ ಸಮರ್ಪಿಸಿದ ಭಕ್ತಸಾಗರ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ನಾಲವಾರದಲ್ಲಿ ತಮ್ಮ ಹರಕೆಗಳನ್ನು ಪೂರೈಸಿದರೆ ಪ್ರತೀಕವಾಗಿ ನೆರವೇರುವ ತನಾರತಿ ಸೇವೆಯನ್ನುಆರಾಧ್ಯ ಸದ್ಗುರುವಿಗೆ ಸಲ್ಲಿಸುವ ವಿಶಿಷ್ಟ ಉತ್ಸವ ಶನಿವಾರ ಬೆಳಗಿನ ಸುಪ್ರಭಾತ ಸಮಯದಲ್ಲಿ ಸಂಭ್ರಮದಿಂದ ನೆರವೇರಿತು.

ಶ್ರೀ ಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಸಿದ್ದ ತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ವೈಭವದಿಂದ ಶ್ರದ್ಧೆ ಭಕ್ತಿಯ ಮಧ್ಯೆ ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವಕ್ಕೆ ಸಹಸ್ರ ಸಹಸ್ರ ಭಕ್ತರ ಮಧ್ಯೆ ಅಕ್ಷತ ತೃತಿ ಅಮಾವಾಸ್ಯೆಯ ದಿನವಾದ ಶುಕ್ರವಾರ ಮಧ್ಯರಾತ್ರಿ ಭಕ್ತಿ ಭಾವದಿಂದ ನೆರವೇರಿತು.

ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆಯ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರ ರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಹರಕೆ ತೀರಿಸಿದರು.

ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಸನ್ನಿಧಿಯಲ್ಲಿ ವರ್ಷದ ಎರಡನೇ ತನಾರತಿ ಉತ್ಸವವು ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಅತ್ಯಂತ ವೈಭವದಿಂದ ನಡೆಯಿತು.

ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಶ್ರೀಮಠದ ಪಾರಂಪರಿಕ ವಿಶೇಷ ಉಡುಪು ಧರಿಸಿ, ಪುಷ್ಪಾಲಂಕೃತವಾಗಿ, ತನಾರತಿ ಉತ್ಸವದ ನೇತೃತ್ವ ವಹಿಸಿದ್ದರು. ಅವರ ಹಿಂದೆ ಸಾವಿರಾರು ಸದ್ಭಕ್ತರು ವಿಶೇಷವಾಗಿ ತಯಾರಿಸಿದ ಹಣತೆಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮಠದ ಸುತ್ತಲೂ ಐದು ಸುತ್ತು ಪ್ರದಕ್ಷಿಣೆ ಹಾಕಿದರು.

ಪುರವಂತಿಕೆ, ಪೂರ್ಣಕುಂಭ, ಭಾಜಾ-ಭಜಂತ್ರಿ, ವೈದಿಕರ ವೇದಘೋಷಗಳ ಮಧ್ಯೆ ಆಂಧ್ರಪ್ರದೇಶ ಗದ್ವಾಲ್ ಮಂಗಳ ವಾದನದ ನಡೆದ ಈ ಉತ್ಸವ ಶುಕ್ರವಾರ ಮಧ್ಯರಾತ್ರಿ ಪ್ರಾರಂಭವಾಗಿ ಶನಿವಾರ ಬೆಳಗಿನ ಜಾವದವರೆಗೂ ನಡೆಯಿತು.

ಮಧ್ಯರಾತ್ರಿ ಸ್ನಾನಾದಿಗಳನ್ನು ಪೂರೈಸಿಕೊಂಡು, ಗದ್ದುಗೆಗೆ ನಮಿಸಿ, ಗೋದಿಹಿಟ್ಟಿನಿಂದ ವಿಶೇಷ ಪ್ರಣತೆಗಳನ್ನು ತಯಾರಿಸಿ ಅದರಲ್ಲಿ ಜ್ಯೋತಿ ಪ್ರಜ್ವಲಿಸಿ ಮಹಾಗುರುವಿಗೆ ಬೆಳಗಿ ಭಕ್ತರು ಧನ್ಯತೆಯನ್ನು ಅನುಭವಿಸಿದರು.

ಭಕ್ತರು ಬೇಡಿಕೊಂಡ ಇಷ್ಟಾರ್ಥಗಳು ಈಡೇರಿದ ನಂತರ ತನಾರತಿ ಹರಕೆಯನ್ನು ಸಲ್ಲಿಸುವ ಪರಂಪರೆ ಕಳೆದ ಮೂರು ಶತಮಾನಗಳಿಂದಲೂ ಶ್ರೀಮಠದಲ್ಲಿ ನಡೆಯುತ್ತಾ ಬಂದಿದ್ದು ನಾಲವಾರ ಶ್ರೀಮಠದ ಪಾರಂಪರಿಕ ಉತ್ಸವವಾಗಿದೆ.

ತನಾರತಿ ಸಂದರ್ಭದಲ್ಲಿ ದೀಪಗಳ ಸಾಲು ನದಿಯ ರೀತಿ ಹರಿಯುವ ದೃಶ್ಯ ಕಣ್ಮನ ಸೆಳೆಯುತ್ತದೆ. ಈ ರೀತಿಯ ವೈಶಿಷ್ಟ್ಯ ಪೂರ್ಣ ಉತ್ಸವ ನಾಡಿನ ಯಾವುದೇ ಭಾಗದಲ್ಲಿ ಕಾಣಸಿಗುವುದಿಲ್ಲ. ನಾಲವಾರದ ಜಾತ್ರಾ ಮಹೋತ್ಸವದ ವಿಶೇಷಗಳಲ್ಲಿ ತನಾರತಿ ಉತ್ಸವ ಮಹತ್ವದ್ದಾಗಿದ್ದು, ಜಾತಿ ಮತ ಪಂಥಗಳನ್ನು ಮರೆತು ಸಹಸ್ರಾರು ಭಕ್ತರು ಹರಕೆಯನ್ನು ಸಮರ್ಪಿಸುವ ದೃಶ್ಯ ನಯನಮನೋಹರ ಮಾತ್ರವಲ್ಲದೇ ಆಸ್ತಿಕ ಮನಸ್ಸುಗಳನ್ನು ಭಕ್ತಿಭಾವದಲ್ಲಿ ತೇಲಾಡುವಂತೆ ಮಾಡುತ್ತದೆ.

Spread the love

Leave a Reply

Your email address will not be published. Required fields are marked *

error: Content is protected !!