ನೀಟ್ ಹಗರಣ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ, ಶಹಾಬಾದನಲ್ಲಿ ಎಐಡಿಎಸ್ಓ ವಿಜಯೋತ್ಸವ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ನೀಟ್ ಪರೀಕ್ಷೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಹಾಗೂ ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.
ವಿದ್ಯಾರ್ಥಿ ಸಂಘಟನೆಗಳ ತೀವ್ರ ಒತ್ತಡಕ್ಕೆ ಮಣಿದು ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ, ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿವೈಒ) ವತಿಯಿಂದ ಸಂಭ್ರಮದ ವಿಜಯೋತ್ಸವ ಆಚರಿಸಲಾಯಿತು.
ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಮತ್ತು ಯುವಜನರು, ‘ವಿದ್ಯಾರ್ಥಿಗಳ ಐಕ್ಯತೆಗೆ ಜಯವಾಗಲಿ’, ‘ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರಕ್ಕೆ ಧಿಕ್ಕಾರ’ ಎಂದು ಘೋಷಣೆಗಳನ್ನು ಕೂಗಿ ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ದ ನೀಟ್ ಪರೀಕ್ಷೆ ಹಗರಣದ ನೈತಿಕ ಹೊಣೆ ಹೊರಲು ಶಿಕ್ಷಣ ಸಚಿವರು ಹಿಂದೇಟು ಹಾಕಿದ್ದರು. ಆದರೆ ವಿದ್ಯಾರ್ಥಿಗಳ ಒಗ್ಗಟ್ಟು ಮತ್ತು ಸುದೀರ್ಘ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಬೇಕಾಯಿತು. ಇದು ಇಡೀ ದೇಶದ ವಿದ್ಯಾರ್ಥಿ ಸಮುದಾಯ ಮತ್ತು ಹೋರಾಟಗಾರರ ಐತಿಹಾಸಿಕ ಜಯ ಎಂದು ಬಣ್ಣಿಸಿದರು.
ಈ ವಿಜಯೋತ್ಸವ ಕಾರ್ಯಕ್ರಮದಲ್ಲಿ ರಾಘವೇಂದ್ರ ಎಂಜಿ, ಗುಂಡಮ್ಮ ಮಡಿವಾಳ, ಜಗನ್ನಾಥ ಎಸ್.ಎಚ್, ಸಿದ್ದು ಚೌಧರಿ, ರಮೇಶ ದೇವಕರ್, ರಘು ಪವಾರ, ತೇಜೆಸ್ ಇಬ್ರಾಹಿಂಪುರ, ದೇವರಾಜ, ಸ್ಪೂರ್ತಿ ಗುರಜಾಲಕರ, ಎಐಡಿಎಸ್ಓ, ಎಐಡಿವೈಓ ಹಾಗೂ ಎಐಎಂಎಸ್ಎಸ್ ಸಂಘಟನೆಗಳ ಪದಾಧಿಕಾರಿಗಳು, ಪ್ರಮುಖ ನಾಯಕರು ಮತ್ತು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿ ಹೋರಾಟದ ಯಶಸ್ಸನ್ನು ಸಂಭ್ರಮಿಸಿದರು.

