ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಫಾರೂಖ್ ಮಣ್ಣೂರ ಆಕ್ರೋಶ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕೇಂದ್ರದ ಎನ್ಡಿಎ ಸರ್ಕಾರ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ಗೆ 3 ರೂ. ಹೆಚ್ಚಿಸಿರುವುದು ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಹೊರೆ ಹಾಕಿದಂತಾಗಿದೆ ಎಂದು ಸಮಾಜ ಸೇವಕ ಡಾ.ಫಾರೂಖ್ ಮಣ್ಣೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಚರಾಜ್ಯ ಚುನಾವಣೆಯ ಬಳಿಕ ಕೇಂದ್ರ ಸರ್ಕಾರ ವಾಣಿಜ್ಯ ಅಡುಗೆ ಅನಿಲ ದರ ಹೆಚ್ಚಿಸಿದ್ದು, ಚಿನ್ನದ ಮೇಲಿನ ಆಮದು ಸುಂಕ ಏರಿಸಿದ್ದು, ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸುವ ಮೂಲಕ ಜನವಿರೋಧಿ ನೀತಿಯನ್ನು ಮುಂದುವರಿಸಿದೆ ಎಂದು ಟೀಕಿಸಿದ್ದಾರೆ.
ಕಳೆದ 12 ವರ್ಷಗಳಿಂದ ಬಿಜೆಪಿ ನೇತೃತ್ವದ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವುದು, ಯುವಕರಿಗೆ ಉದ್ಯೋಗ ನೀಡುವುದು, ಇಂಧನ ದರ ಇಳಿಸುವುದು ಸೇರಿದಂತೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಬೆಲೆ ಏರಿಕೆ ನಿಯಂತ್ರಿಸುವ ಬದಲು ಜನರಿಗೆ ಕಡಿಮೆ ಪೆಟ್ರೋಲ್ ಬಳಸಿ, ಚಿನ್ನ ಖರೀದಿಸಬೇಡಿ ಎಂಬ ಉಚಿತ ಸಲಹೆ ನೀಡಲಾಗುತ್ತಿದೆ. ಬಡವರಿಗಾಗಿ ನೀಡುತ್ತಿದ್ದ ಅಡುಗೆ ಅನಿಲ ಸಬ್ಸಿಡಿಯನ್ನೂ ಸ್ಥಗಿತಗೊಳಿಸಲಾಗಿದೆ. ದೇಶದ ಜನರಿಗೆ ನಿಜವಾದ ಪರಿಹಾರ, ಉದ್ಯೋಗ ಸೃಷ್ಟಿ ಮತ್ತು ಬೆಲೆ ಏರಿಕೆ ನಿಯಂತ್ರಣ ಅಗತ್ಯವಿದ್ದು, ಸುಳ್ಳು ಭರವಸೆಗಳು ಮತ್ತು ಪ್ರಚಾರ ರಾಜಕಾರಣದಿಂದ ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

