ರಾಜ್ಯದ 14.24 ಲಕ್ಷ ಫಲಾನುಭವಿಗಳಿಗೆ ಒಟ್ಟು 1,033.60 ಕೋಟಿ ಇನ್ ಪುಟ್ ಸಬ್ಸಿಡಿ ಮೊತ್ತ ರೈತರ ಖಾತೆಗೆ ವರ್ಗಾವಣೆಗೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ರಾಜ್ಯದ 14.24 ಲಕ್ಷ ಫಲಾನುಭವಿಗಳಿಗೆ ಇನ್ ಪುಟ್ ಸಬ್ಸಿಡಿ ರೂ 1,033.60 ಕೋಟಿ ರೈತರ ಖಾತೆಗೆ ವರ್ಗಾವಣೆಗೆ ಕ್ರಮವಹಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಪರಿಹಾರದ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಮೂಲಕ ಪರಿಹಾರ ಹಂಚಿಕೆಗೆ ಚಾಲನೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗದಲ್ಲಿ ಅತಿವೃಷ್ಟಿಯಿಂದ ರೈತರ ಬದುಕು ದುಸ್ಥರವಾಗಿತ್ತು. ಈ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಪರಿಸ್ಥಿತಿಯ ಗಂಭೀರತೆಯ ಬಗ್ಗೆ ಗಮನಕ್ಕೆ ತರಲಾಗಿತ್ತು, ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿಗಳು ಕಲಬುರಗಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದರು. ಎನ್.ಡಿ.ಆರ್.ಎಫ್ ನಿಯಮಗಳಲ್ಲಿರುವ ಮೊತ್ತದೊಂದಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ಘೋಷಿಸಲಾಗಿತ್ತು. ವೈಮಾನಿಕ ಸಮೀಕ್ಷೆಯ ವೇಳೆ ಕಲಬುರಗಿ ಜಿಲ್ಲೆಗೆ ಆಗಮಿಸಿದ್ದ ಸಿಎಂ ರೈತರ ಕಷ್ಟ ನಷ್ಟಗಳನ್ನು ಅವಲೋಕಿಸಿದ್ದರು. ಅಂತೆಯೇ ಕಲಬುರಗಿ ಜಿಲ್ಲೆಗೆ ಅತಿ ಹೆಚ್ಚಿನ ಪರಿಹಾರ ದೊರಕಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಒಟ್ಟು 3,24,205 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಅದರಲ್ಲಿ ಪಾವತಿಗೆ ಪರಿಗಣಿಸಲಾಗಿರುವ ವಿಸ್ತೀರ್ಣ 2,91,381.52 ಹೆಕ್ಟರ್ ಇದ್ದು, ಒಟ್ಟು 3,23,318 ರೈತರು ಪರಿಹಾರ ಪಡೆದ ಫಲಾನುಭವಿಗಳಾಗಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಎಸ್.ಡಿ.ಆರ್.ಎಫ್ ನಿಯಮಗಳ ಪ್ರಕಾರ 25,097.21ಲಕ್ಷ ಮೊತ್ತ ಪಾವತಿ ಪ್ರಕ್ರಿಯೆಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕಲಬುರ್ಗಿ ಜಿಲ್ಲೆಗೆ ದೊರಕಿರುವ ರಾಜ್ಯ ಸರ್ಕಾರ ಘೋಷಿಸಿದ ಹೆಚ್ಚುವರಿ ಇನ್ ಪುಟ್ ಸಬ್ಸಿಡಿ ಮೊತ್ತ 24,775.82 ಲಕ್ಷಗಳು ಹಾಗೂ ಜಿಲ್ಲೆಗೆ ಈಗಾಗಲೇ ವಿತರಿಸಲಾಗಿರುವ ಮತ್ತು ಪಾವತಿ ಪ್ರಕ್ರಿಯೆಯಲ್ಲಿರುವ ಒಟ್ಟು ಮೊತ್ತ 49,873.03 ಲಕ್ಷಗಳು. ರಾಜ್ಯದ 27 ಜಿಲ್ಲೆಗಳಲ್ಲಿ ಒಟ್ಟು 14.58 ಲಕ್ಷ ಹೆಕ್ಟೇರ್ ವ್ಯಾಪ್ತಿಯಲ್ಲಿ ಅಂದಾಜು 10,748.00 ಕೋಟಿ ಮೊತ್ತದ ಹಾನಿಯಾಗಿದೆ.
ಮಳೆಯಾಶ್ರಿತ ಬೆಳೆಗಳ ಪ್ರತಿ ಹೆಕ್ಟೇರ್ ಗೆ 8,500 ರಿಂದ 17,000 ಹೆಚ್ಚಿಸಲಾಗಿದೆ, ನೀರಾವರಿ ಬೆಳೆಗಳ ಪ್ರತಿ ಹೆಕ್ಟೇರ್ ಗೆ 17,000ರಿಂದ 25,500 ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಹಾಗೂ ಬಹುವಾರ್ಷಿಕ ಬೆಳೆಗಳ ಪ್ರತಿ ಹೆಕ್ಟೇರ್ ಗೆ 22,500 ರಿಂದ 31,000 ಪರಿಹಾರ ಮೊತ್ತ ಹೆಚ್ಚಿಸಲಾಗಿದೆ. ರಾಜ್ಯದ 14,24,124 ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಹೆಚ್ಚುವರಿ ಇನ್ ಪುಟ್ ಸಬ್ಸಿಡಿ ಮೊತ್ತವಾದ 1033.60 ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ವರ್ಗಾಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.
ಸಂಕಷ್ಟದಲ್ಲಿರುವ ರೈತರಿಗೆ ಸಕಾಲದಲ್ಲಿ ನ್ಯಾಯಯುತ ಪರಿಹಾರ ಒದಗಿಸುವ ಮೂಲಕ ನಮ್ಮ ಸರ್ಕಾರವು “ಅನ್ನದಾತರೇ ಮೊದಲು“ ಎಂಬ ಬದ್ಧತೆಯನ್ನು ನಿರೂಪಿಸಿದೆ ಎಂದು ಸಚಿವರು ಹೇಳಿದ್ದಾರೆ.
