ಸರಕಾರಿ ನೌಕರರ ಸಂಘ ಹರ್ಷ ವ್ಯಕ್ತ | 371 (ಜೆ) ಅಡಿಯಲ್ಲಿ ಹೊರಡಿಸಿದ ಆದೇಶ ಶೀಘ್ರ ಅನುಷ್ಠಾನಕ್ಕೆ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಿಯಾಂಕ ಖರ್ಗೆ ಸೂಚನೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: 371 (ಜೆ) ಸಚಿವ ಸಂಪುಟ ಉಪ ಸಮಿತಿಯಲ್ಲಿ ಇತರೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಸರ್ಕಾರಿ ನೌಕರರ ಮುಂಬಡ್ತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೆ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕ್ರಮ ಕೈಗೊಳ್ಳಲು ಮತ್ತು ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಬಡ್ತಿ ಪ್ರಕರಣಗಳ ಸಂಬಂಧ ಚರ್ಚೆ ನಡೆಸಿ ಅವುಗಳನ್ನು ಶೀಘ್ರದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ ಪ್ರಿಯಾಂಕ ಖರ್ಗೆ ಆಡಳಿತ ಸುಧಾರಣಾ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿರುವುದು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರಿಗೆ ಸಂತಸವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು, ಭಾರತದ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿರುವುದು ಸ್ವಾಗತಾರ್ಹವಾಗಿದೆ. ಆದರೆ 371(ಜೆ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸ್ಥಳೀಯ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯಿಂದ ಬಡ್ತಿಯಲ್ಲಿ ಸಾಕಷ್ಟು ಅನ್ಯಾಯವಾಗುತ್ತಿದ್ದು, ಕಾರಣ ಪ್ರತ್ಯೇಕ ಜೇಷ್ಠತಾ ಪಟ್ಟಿ ಮಾಡದೇ ಎಲ್ಲಾ ನೌಕರರಿಗೆ ಒಂದೇ ಜೇಷ್ಠತಾ ಪಟ್ಟಿ ತಯಾರಿಸಲು ಮತ್ತು 371(ಜೆ) ಸಂಬಂಧಪಟ್ಟಂತೆ ಸುಮಾರು 9 ವಿಷಯಗಳ ಬಗ್ಗೆ ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ಮಾಡಿ 371(ಜೆ) ಆದೇಶಗಳ ಸಮರ್ಪಕ ಅನುಷ್ಠಾನಗೊಳಿಸಲು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಪ್ರಿಯಾಂಕ ಖರ್ಗೆ ರವರಿಗೆ ಅಕ್ಟೋಬರ್ 31 ರಂದು ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮನವಿ ನೀಡಲಾಗಿತ್ತು.
ಮನವಿಗೆ ಸ್ಪಂದಿಸಿದ 371 (ಜೆ) ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆಯವರಿಗೆ ಮತ್ತು ಉಪ ಸಮಿತಿಯ ಎಲ್ಲಾ ಸದಸ್ಯರಿಗೆ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪದಾಧಿಕಾರಿಗಳಾದ ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ಎಂ.ಬಿ ಪಾಟೀಲ, ಸುರೇಶ ವಗ್ಗೆ, ನಿಜಲಿಂಗಪ್ಪ ಕೊರಳ್ಳಿ, ಸಿದ್ದಲಿಂಗಯ್ಯ ಮಠಪತಿ ರವರು ಧನ್ಯವಾದ ಕೃತಜ್ಞತೆಗಳು ಸಲ್ಲಿಸಿದ್ದಾರೆ.

