ಶಹಾಬಾದ ಅ.16 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರೈತರಿಂದ ಪ್ರತಿಭಟನೆ: ಪ್ರಶಾಂತಗೌಡ ಪಾಟೀಲ್ 

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ರೈತರ ಬೆಳೆಗಳು ನಷ್ಟವಾಗಿದ್ದು ಸರ್ಕಾರ ಶೀಘ್ರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ವಾಸುದೇವ್ ಮೇಟಿ) ಹಸಿರು ಸೇನೆ ಬಣದ ವತಿಯಿಂದ ಇದೇ ಅ.16 ರಂದು ಬೈಕ್ ರಾಲಿ ಮತ್ತು ಪಾದಯಾತ್ರೆ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪ್ರಶಾಂತಗೌಡ ಪಾಟೀಲ್ ಹೇಳಿದರು.

ರೈತ ಸಂಘದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 11 ಗಂಟೆಗೆ ಬಸವೇಶ್ವರ ವೃತ್ತದಿಂದ ಪ್ರಮುಖ ರಸ್ತೆಗಳ ಮೂಲಕ ಬೈಕ್ ರಾಲಿ ನಡೆಸಿ ಡಾ. ಅಂಬೇಡ್ಕರ್ ಪ್ರತಿಮೆ ಹತ್ತಿರ ಪ್ರತಿಭಟಿಸಲಾಗುವುದು. ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ ಅದಕ್ಕಾಗಿ ಸರ್ಕಾರ ಸಂಪೂರ್ಣ ಪರಿಹಾರ ನೀಡಬೇಕು, ಹೊಲಗಳಿಗೆ ಸಂಪರ್ಕ ರಸ್ತೆ ಕಲ್ಪಿಸಿ ಕೊಡಬೇಕು, ಭೀಮಾ, ಕಾಗಿಣಾ ನದಿಯ ಪ್ರವಾಹದಿಂದ ತೊಂದರೆ ಅನುಭವಿಸಿದ ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಆರೋಗ್ಯದ ಕಡೆ ಗಮನಹರಿಸಿ ಚಿಕಿತ್ಸೆ ನೀಡಬೇಕು, ಬೆಳೆ ನಷ್ಟ ಅನುಭವಿಸಿದ ರೈತರಿಗೆ 25 ಸಾವಿರ ರೂ.ಗಳು ಪ್ರತಿ ಎಕರೆಗೆ ಪರಿಹಾರ ನೀಡಬೇಕು, ನದಿಗಳ ಹಿನ್ನೀರಿನ ಪ್ರವಾಹ ಪೀಡಿತ ಸಂತ್ರಸ್ಥರಿಗೆ ಪರಿಹಾರ ನೀಡಬೇಕು, ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜೇವರ್ಗಿ ತಾಲೂಕಿನ ಸಂಘದ ಅಧ್ಯಕ್ಷ ಪಂಚಯ್ಯ ಹಿರೇಮಠ, ಶಹಾಬಾದ ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಸಂಗೀತ ವಿ. ವಾಲಿ, ತಾಲೂಕು ಉಪಾಧ್ಯಕ್ಷ ಶೀತಲ್ ಚವ್ಹಾಣ, ರಾಜ್ಯ ಕಾರ್ಯದರ್ಶಿ ಕವಿತಾ ಷಟ್ಗಾರ, ವಿರೇಶ ವಾಲಿ ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!