ವಾಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಆಚರಿಸಲಾಯಿತು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ ತಾರತಮ್ಯದ ವಿರುದ್ಧ ಹೋರಾಡಲು ಡಾ. ಅಂಬೇಡ್ಕರ್ ಅವರು ತಮ್ಮ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟು, ಸದೃಢ ರಾಷ್ಟ್ರಕ್ಕಾಗಿ ಸಂವಿಧಾನದ ಮುಖಾಂತರ ಮುನ್ನುಡಿ ಬರೆದರು ಎಂದರು.
ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ನಮ್ಮ ಪಾಲಿಗೆ ಸಾರ್ವಕಾಲಿಕ ಸಕಾಲಿಕವಾಗಿವೆ. ಜಾತಿಭೇದವಿಲ್ಲದ ಸಮಸಮಾಜದ ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇವೆ. ಅವರು ರೂಪಿಸಿದ ತತ್ವಗಳನ್ನು ಗೌರವಿಸಿ, ಭ್ರಾತೃತ್ವದ ಭಾರತಕ್ಕಾಗಿ ಬದುಕಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, ಅಂಬೇಡ್ಕರ್ ಅವರೊಬ್ಬರು ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕರು ಎಂದರು. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದು ಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರಾಗಿದ್ದಾರೆ. ಸಾಮಾಜಿಕ ಕ್ರಾಂತಿಯ ಹರಿಕಾರ ಮತ್ತು ಭಾರತದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರು ಜಾತಿ ಪದ್ಧತಿ, ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ನಿರಂತರ ಹೋರಾಡಿ, ಶೋಷಿತ ಸಮುದಾಯಗಳಿಗೆ ಶಿಕ್ಷಣ, ಸ್ವಾಭಿಮಾನ ಮತ್ತು ರಾಜಕೀಯ ಹಕ್ಕುಗಳನ್ನು ತಂದುಕೊಟ್ಟ ಧೀಮಂತ ಚೇತನ ಎಂದು ಹೇಳಿದರು.
ಮುಖಂಡ ಆನಂದ ಇಂಗಳಗಿ ಮಾತನಾಡಿದರು. ಈ ಸಂಧರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಯಮನಪ್ಪ ಪುಜಾರಿ, ಅರ್ಜುನ ಕಾಳೆಕರ, ಗಿರಿಮಲ್ಲಪ್ಪ ಕಟ್ಟಿಮನಿ, ಅಶೋಕ ಹರನಾಳ, ಮಲ್ಲಿಕಾರ್ಜುನ ಸಾತಖೇಡ ಸೇರಿದಂತೆ ಇತರರು ಇದ್ದರು.

